ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಶುಕ್ರವಾರ) ಮಂಡಿಸಿದ ರಾಜ್ಯದ ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
- ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.
- ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ಅನುದಾನ.
- 2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
- 2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ₹600 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಶಾಲೆಗಳನ್ನು ₹400 ಕೋಟಿ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು.
- ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
- ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ, ಅವರಿಗೆ K-CET/JEE/NEET ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು Center of Excellenceಗಳನ್ನಾಗಿ ಸ್ಥಾಪಿಸಲಾಗುವುದು. ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು.
- ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಸ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
- ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು.
- ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.
- ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ₹6,000 ಮಾಸಿಕ ಗೌರವಧನವನ್ನು ನೀಡಲಾಗುವುದು.
- ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ ಜನರಿಗೆ 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು.
- ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ತಲಾ ₹50,000ಗಳನ್ನು ನೀಡಲಾಗುವುದು.
- ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ 75ರಷ್ಟು ಅಥವಾ ಗರಿಷ್ಠ ₹3ಲಕ್ಷ ಸಹಾಯಧನ ನೀಡಲಾಗುವುದು.
- ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು.
- ಹಿರಿಯ ನಾಗರೀಕರಿಗೆ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳನ್ನು ಸ್ಥಾಪಿಸಲು ತಲಾ ₹50 ಲಕ್ಷದಂತೆ ಒಟ್ಟಾರೆ ₹4 ಕೋಟಿ ಒದಗಿಸಲಾಗುವುದು.
- ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಮುಖ್ಯ ಸಂಸ್ಥಾತ್ಮಕ ಮೂಲಸೌಕರ್ಯದ ನಿರ್ಮಾಣಕ್ಕೆ ₹5ಕೋಟಿಗಳನ್ನು ಒದಗಿಸಲಾಗುವುದು.
- ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
- ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು.
- ವಕ್ಸ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ಮುಂದುವರೆದು, ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜನ್ನು ಪ್ರಾರಂಭಿಸಲಾಗುವುದು.
- ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಸ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
- ಬೀದರ್ನ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು.