ಈ ಆಸ್ತಿಗಳ ಮೂಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪ್ರಕಟಣೆ ಪ್ರಕಾರ, ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆದಿತ್ತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.
ರೂ. 3,95,941 ನಗದು
ರೂ. 1,47,50,506 ಮೌಲ್ಯದ ಚಿನ್ನಾಭರಣ
ರೂ. 17,00,000 ಮೌಲ್ಯದ ವಾಹನಗಳು
ರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿ
ರೂ. 72,68,554 ಮೌಲ್ಯದ ಇತರ ವಸ್ತುಗಳು
ಇವೆಲ್ಲವನ್ನು ಸೇರಿಸಿ ರೂ.2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂ.8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಈ ಆಸ್ತಿಗಳ ಮೂಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.